ಅಲೆಮಾರಿ ಬಂಧುಗಳಿಗೆ ಶೇ.1 ಒಳಮೀಸಲು ಭರವಸೆ

Contributed byKeerthi Prasad|Vijaya Karnataka
Subscribe

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಒಳಮೀಸಲು ಕಲ್ಪಿಸುವ ಭರವಸೆ ನೀಡಿದ್ದಾರೆ. 70 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಸಮುದಾಯದ ಪ್ರತಿನಿಧಿಗಳೊಂದಿಗೆ ಸಿಎಂ ಸಭೆ ನಡೆಸಿದರು. ಕಾನೂನಿನ ಪ್ರಕಾರ ಮೀಸಲು ನೀಡುವುದಾಗಿ ತಿಳಿಸಿದರು. ಪ್ರತ್ಯೇಕ ಅಭಿವೃದ್ಧಿ ನಿಗಮ ರಚನೆಗೂ ಒಪ್ಪಿಗೆ ಸೂಚಿಸಿದರು. ನ್ಯಾಯಾಲಯದಲ್ಲಿರುವ ಅರ್ಜಿ ಹಿಂಪಡೆಯುವಂತೆ ಮನವಿ ಮಾಡಿದರು.

1 reservation promised to nomadic community members chief ministers assurance
ಬೆಂಗಳೂರು: ಸಾಮಾಜಿಕ ನ್ಯಾಯ ಪಾಲನೆಗೆ ಸರ್ಕಾರ ಬದ್ಧವಾಗಿದ್ದು, ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಒಳ ಮೀಸಲು ನೀಡಲು ಕಾಲಾವಕಾಶ ಕೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲೆಮಾರಿ ಸಮುದಾಯಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ. 70 ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಮುದಾಯದ ಮುಖಂಡರು, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲು ಕಲ್ಪಿಸಿ ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯುವಂತೆ ಸಿಎಂ ಮನವಿ ಮಾಡಿದರು.

ನ್ಯಾ. ಎಚ್‌.ಎನ್‌. ನಾಗಮೋಹನ್‌ದಾಸ್‌ ನೇತೃತ್ವದ ಏಕಸದಸ್ಯ ಆಯೋಗವು ಪರಿಶಿಷ್ಟ ಜಾತಿಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ, ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಒಳ ಮೀಸಲು ಶಿಫಾರಸು ಮಾಡಿತ್ತು. ಆದರೆ, ರಾಜ್ಯ ಸರ್ಕಾರ ಮೂರು ಗುಂಪುಗಳಾಗಿ ವಿಂಗಡಿಸಿ ಮೀಸಲು ಮರು ನಿಗದಿಪಡಿಸಿ ಆದೇಶಿಸಿತ್ತು. ಇದು ಅವೈಜ್ಞಾನಿಕ ಎಂದು ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ, ಇತರ ಪರಿಶಿಷ್ಟ ಜಾತಿಗಳ ಅಧೀನದಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜಾತಿಗಳ ಸಂಘ ಹೈಕೋರ್ಟ್‌ ಮೊರೆ ಹೋಗಿದ್ದವು. ನ್ಯಾಯಾಲಯ, ಆ.25ರಂದು ಹೊರಡಿಸಿದ್ದ ಆದೇಶದ ಮೇಲೆ ಯಾವುದೇ ಸರಕಾರಿ ನೇಮಕ ಮಾಡದಂತೆ ಆದೇಶಿಸಿ, ವಿಚಾರಣೆಯನ್ನು ನ.13ಕ್ಕೆ ಮುಂದೂಡಿದೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, "ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್‌ಸಿಪಿ-ಟಿಎಸ್‌ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು ನಮ್ಮ ಸರಕಾರ. ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದೇ ಸರಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಜಾತಿಯನ್ನು ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರಕಾರಕ್ಕಿಲ್ಲ," ಎಂದು ಸ್ಪಷ್ಟಪಡಿಸಿದರು.

ನ್ಯಾ. ನಾಗಮೋಹನ್‌ ದಾಸ್‌ ಅವರ ಆಯೋಗವು ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲು ಶಿಫಾರಸು ಮಾಡಿತ್ತು. ಆದರೆ, ಸರಕಾರ ಅಲೆಮಾರಿ ಸಮುದಾಯವನ್ನು ‘ಪ್ರವರ್ಗ-ಸಿ’ ಅಡಿ ಸೇರಿಸಿದೆ. ಹಾಗಾಗಿ ಪ್ರತ್ಯೇಕವಾಗಿ ಶೇ.1ರಷ್ಟು ಮೀಸಲು ಕಲ್ಪಿಸಬೇಕು ಎಂಬುದು ಅಲೆಮಾರಿ ಸಮುದಾಯದ ಮನವಿ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದರು.

ಅಲೆಮಾರಿ ಸಮುದಾಯದವರು ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಮತ್ತು ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕೆಂದು ಕೋರಿದ್ದರು. ಇದಕ್ಕೆ ಸಿಎಂ, "ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸಲು ಯಾವುದೇ ತೊಂದರೆ ಇಲ್ಲ," ಎಂದು ಭರವಸೆ ನೀಡಿದರು.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲು ಕಲ್ಪಿಸಿ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ನ್ಯಾಯಾಲಯದಲ್ಲಿ ಹೂಡಿರುವ ದಾವೆ ಹಿಂಪಡೆಯುವಂತೆ ಒಕ್ಕೂಟದ ನಿಯೋಗವನ್ನು ಕೋರಲಾಗಿದೆ ಎಂದು ಸಿಎಂ ಹೇಳಿದರು. ಸಭೆಯಲ್ಲಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮಾಜಿ ಸಚಿವ ಎಚ್‌.ಆಂಜನೇಯ, ಅಲೆಮಾರಿ ಸಮುದಾಯಗಳ ಪ್ರಮುಖರು ಪಾಲ್ಗೊಂಡಿದ್ದರು.

ಒಕ್ಕೂಟದ ಪ್ರತಿನಿಧಿಗಳನ್ನು ಸ್ವಾತಂತ್ರ್ಯ ಉದ್ಯಾನದಿಂದ ವಿಧಾನಸೌಧಕ್ಕೆ ಪೊಲೀಸರು ಬಿಎಂಟಿಸಿ ಬಸ್‌ನಲ್ಲಿ ಕರೆತಂದರು. ಬಿಗಿ ಪೊಲೀಸ್‌ ಭದ್ರತೆಯಲ್ಲಿ ಅವರನ್ನು ಸಭೆಗೆ ಕರೆತಂದು, ಸಭೆಯ ಬಳಿಕ ಸ್ವಾತಂತ್ರ್ಯ ಉದ್ಯಾನಕ್ಕೆ ಬಿಡಲಾಯಿತು. ಸಭೆಯ ಬಳಿಕ ಸಿಎಂ ವಿಧಾನಸೌಧದಿಂದ ಹೊರಡುವಾಗ, ಅಲೆಮಾರಿ ಸಮುದಾಯದ ಕೆಲವರು ಸರಕಾರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ರಾಜ್ಯದಲ್ಲಿನ 49 ಸೂಕ್ಷ್ಮ ಹಾಗೂ 10 ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಒಳ ಮೀಸಲಿಗೆ ಒತ್ತಾಯಿಸಿ 2-3 ತಿಂಗಳಿನಿಂದ ಹೋರಾಟ ನಡೆಯುತ್ತಿದೆ. ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ರಚನೆ ಹಾಗೂ ವಿಶೇಷ ಆರ್ಥಿಕ ಪ್ಯಾಕೇಜ್‌ ನೀಡುವಂತೆ ಮನವಿ ಮಾಡಲಾಯಿತು ಎಂದು ರಾಜ್ಯ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಶೇಷಪ್ಪ ತಿಳಿಸಿದರು. "ಶೇ.1ರಷ್ಟು ಒಳ ಮೀಸಲನ್ನು ಕಾನೂನು ಚೌಕಟ್ಟಿನಲ್ಲಿ ಕಲ್ಪಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಪ್ರತ್ಯೇಕ ನಿಗಮ ರಚಿಸಲು, ವಿಶೇಷ ಆರ್ಥಿಕ ಪ್ಯಾಕೇಜ್‌ ಕೊಡಲು ಸಮಸ್ಯೆ ಇಲ್ಲ ಎಂದೂ ಹೇಳಿದ್ದು, ಅವರಿಗೆ ಧನ್ಯವಾದ ಸಲ್ಲಿಸಲಾಗುವುದು," ಎಂದು ಅವರು ಹೇಳಿದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ