Opposition To 3 Major Projects In Uttara Kannada Plea And Auction
ಉತ್ತರ ಕನ್ನಡದ 3 ಯೋಜನೆ ಸ್ಥಗಿತಕ್ಕೆ ಮನವಿ
Contributed by: Keerthi Prasad|Vijaya Karnataka•
Subscribe
ಉತ್ತರ ಕನ್ನಡ ಜಿಲ್ಲೆಯ ಮೂರು ಪ್ರಮುಖ ಯೋಜನೆಗಳಾದ ಬೇಡ್ತಿ-ವರದಾ, ಅಘನಾಶಿನಿ-ವೇದಾವತಿ ನದಿ ತಿರುವು ಮತ್ತು ಶರಾವತಿ ಭೂಗತ ಜಲವಿದ್ಯುತ್ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ. ಈ ಯೋಜನೆಗಳಿಂದ ಸ್ಥಳೀಯರಿಗೆ ತೊಂದರೆಯಾಗಲಿದೆ ಎಂದು ನಿಯೋಗ ತಿಳಿಸಿದೆ. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಬೇಡ್ತಿ-ವರದಾ ನದಿ ತಿರುವು, ಅಘನಾಶಿನಿ-ವೇದಾವತಿ ನದಿ ತಿರುವು ಮತ್ತು ಶರಾವತಿ ಭೂಗತ ಜಲವಿದ್ಯುತ್ ಯೋಜನೆಗಳಿಗೆ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಯೋಜನೆಗಳನ್ನು ಕೂಡಲೇ ಕೈಬಿಡಬೇಕೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ಜಿಲ್ಲೆಯ ಪ್ರಮುಖರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ಈ ಯೋಜನೆಗಳಿಂದ ಜಿಲ್ಲೆಯ ಜನರಿಗೆ ತೊಂದರೆಯಾಗಲಿದೆ ಮತ್ತು ಈಗಾಗಲೇ ಹಲವು ಯೋಜನೆಗಳಿಂದ ಆಸ್ತಿ ಕಳೆದುಕೊಂಡಿರುವ ಸ್ಥಳೀಯರಿಗೆ ಇನ್ನಷ್ಟು ನಷ್ಟ ಉಂಟಾಗಲಿದೆ ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ವಿವರಿಸಿದೆ.
ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗದಲ್ಲಿ ಮಾಜಿ ಸಚಿವ ಶಿವರಾಮ ಹೆಬ್ಬಾರ್, ಶಾಸಕರಾದ ಭೀಮಣ್ಣ ನಾಯ್್ಕ, ಶಾಂತಾರಾಮ ಸಿದ್ದಿ, ಮತ್ತು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಇದ್ದರು. ಈ ಸಂದರ್ಭದಲ್ಲಿ, ಯೋಜನೆಗಳಿಂದಾಗುವ ತೊಂದರೆಗಳು, ಜನರ ಆತಂಕ ಮತ್ತು ಆಕ್ಷೇಪಗಳನ್ನು ನಿಯೋಗವು ಮುಖ್ಯಮಂತ್ರಿಗಳ ಗಮನಕ್ಕೆ ತಂದಿತು.ಮುಖ್ಯಮಂತ್ರಿಗಳನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, "ಉತ್ತರ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಈ ಮೂರು ಯೋಜನೆಗಳಿಂದ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ. ಆದ್ದರಿಂದ, ಈ ಯೋಜನೆಗಳಿಗೆ ತೀವ್ರ ವಿರೋಧವಿದೆ. ನದಿ ತಿರುವು ಯೋಜನೆಗಳ ಬಗ್ಗೆ ನಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ, ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡಲಾಗಿದೆ" ಎಂದು ತಿಳಿಸಿದರು.
"ಈಗಾಗಲೇ ಜಿಲ್ಲೆಯ ಜನರು ಹಲವು ಯೋಜನೆಗಳಿಂದ ಸಾಕಷ್ಟು ಆಸ್ತಿ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೆ ತಂದರೆ, ಸ್ಥಳೀಯರಿಗೆ ಇನ್ನಷ್ಟು ಸಮಸ್ಯೆಗಳು ಮತ್ತು ನಷ್ಟ ಎದುರಾಗಲಿವೆ. ಈ ಯೋಜನೆಗಳನ್ನು ವೈಜ್ಞಾನಿಕ ನೆಲೆಯಲ್ಲಿ ವಿರೋಧಿಸಲಾಗುತ್ತಿದೆ. ನಮ್ಮ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ" ಎಂದು ಕಾಗೇರಿ ಹೇಳಿದರು. ಈ ಯೋಜನೆಗಳ ಬಗ್ಗೆ ಸ್ಥಳೀಯರ ಆತಂಕವನ್ನು ಮುಖ್ಯಮಂತ್ರಿಗಳು ಅರ್ಥಮಾಡಿಕೊಂಡಿದ್ದಾರೆ ಎಂದು ನಿಯೋಗ ತಿಳಿಸಿದೆ.
Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿಲೇಟೆಸ್ಟ್ ನ್ಯೂಸ್ ಅಪ್ಡೇಟ್ಗಳನ್ನು ಪಡೆಯಿರಿ, Vijay Karnataka ಫೇಸ್ಬುಕ್ಪೇಜ್ ಲೈಕ್ ಮಾಡಿರಿ