ವಿಕ ಸುದ್ದಿಲೋಕ ತುಮಕೂರು
ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನ.3ರಿಂದ ಡಿಸೆಂಬರ್ 2ರವರೆಗೆ 8ನೇ ಸುತ್ತಿನ ಕಾಲುಬಾಯಿ ಜ್ವರದ ವಿರುದ್ಧದ ಸಾಮೂಹಿಕ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್ . ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿಶುಕ್ರವಾರ ಪೂರ್ವಭಾವಿ ಸಭೆ ನಡೆಸಿದ ಅವರು, ಅಭಿಯಾನದಲ್ಲಿಪ್ರತಿಯೊಂದು ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಬೇಕು. ಲಸಿಕಾ ಕರ್ತವ್ಯದಲ್ಲಿಯಾವುದೇ ರೀತಿಯ ಅಸಡ್ಡೆ ಅಥವಾ ನಿರ್ಲಕ್ಷ್ಯ ತೋರದೆ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ಸೂಚನೆ ನೀಡಿದರು.
ಕಾಲುಬಾಯಿ ಜ್ವರದಂತಹ ಸಾಂಕ್ರಾಮಿಕ ರೋಗದಿಂದ ಜಾನುವಾರುಗಳನ್ನು ರಕ್ಷಿಸಿಕೊಳ್ಳುವಂತೆ ಪಶುಪಾಲಕರಲ್ಲಿಅರಿವು ಮೂಡಿಸಬೇಕು. ಅಭಿಯಾನದ ಪ್ರಗತಿ ಕುರಿತು ಎಷ್ಟು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ ಎಂಬ ವಿವರವನ್ನು ಅಧಿಕಾರಿಗಳು ಪ್ರತಿದಿನ ಸಲ್ಲಿಸಬೇಕು ಎಂದು ಸೂಚಿಸಿದರು.
ಸ್ಥಳೀಯ ಗ್ರಾಮ ಪಂಚಾಯಿತಿಗಳು ಈ ಅಭಿಯಾನದ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು. ಹಾಲಿನ ಡೇರಿ ಮತ್ತು ಪಶುಪಾಲನಾ ಕೇಂದ್ರಗಳ ಮುಂದೆ ಅಭಿಯಾನದ ಪೋಸ್ಟರ್ ಗಳನ್ನು ಅಳವಡಿಸಿ ಪಶುಪಾಲಕರಿಗೆ ಮಾಹಿತಿ ನೀಡುವಂತೆ ನಿರ್ದೇಶಿಸಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಶಿವಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿಒಟ್ಟು 4 ಲಕ್ಷಕ್ಕೂ ಹೆಚ್ಚು ಜಾನುವಾರುಗಳಿದ್ದು, ಪಶುಪಾಲನಾ ಇಲಾಖೆಯ 554 ಪಶು ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ನೀಡಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿಜಿಲ್ಲಾಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧಿಕಾರಿಗಳು ಹಾಗೂ ವಿವಿಧ ತಾಲೂಕು ಪಶು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಫೋಟೋ 31ಟಿಯುಎಂ2 : ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿಶುಕ್ರವಾರ ಎಡಿಸಿ ಡಾ.ಎನ್ . ತಿಪ್ಪೇಸ್ವಾಮಿ ಅಧ್ಯಕ್ಷತೆಯಲ್ಲಿನಡೆದ ಸಭೆಯಲ್ಲಿರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

