ವಲಸೆ ತಡೆಗೆ ‘ವಿಬಿ ಜಿ ರಾಮ್ ಜಿ’ ಪೂರಕ

Contributed byshivumoktedar@gmail.com|Vijaya Karnataka
vibi ji ram ji scheme providing annual training of 47750 inr
ಚಿತ್ರ: 12ಎಡಿ1: ಔರಾದ್ ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿಬುಧವಾರ ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಮನೆ-ಮನೆಗೆ ತೆರಳಿ ತಾಪಂ ಇಒ ಕಿರಣ ಪಾಟೀಲ್ , ಎಡಿ ಶಿವಕುಮಾರ ಘಾಟೆ ಜಾಗೃತಿ ಮೂಡಿಸಿದರು.

* ತಾಲೂಕು ಪಂಚಾಯಿತಿ ಇಒ ಕಿರಣ ಪಾಟೀಲ್ ಅಭಿಮತ
ವಲಸೆ ತಡೆಗೆ ‘ವಿಬಿ ಜಿ ರಾಮ್ ಜಿ’ ಪೂರಕ

ವಿಕ ಸುದ್ದಿಲೋಕ ಔರಾದ್

ಗ್ರಾಮೀಣ ಭಾಗದಲ್ಲಿವಾಸಿಸುವ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯುವಲ್ಲಿವಿಬಿ ಜಿ ರಾಮ್ ಜಿ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಾಪಂ ಇಒ ಕಿರಣ ಪಾಟೀಲ್ ಹೇಳಿದರು.

ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾರಾಜವಾಡಿ ಗ್ರಾಮದಲ್ಲಿಬುಧವಾರ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಮನೆ-ಮನೆಗೆ ತೆರಳಿ ಗ್ರಾಮಸ್ಥರಲ್ಲಿಜಾಗೃತಿ ಮೂಡಿಸಿ ಅವರು ಮಾತನಾಡಿದರು. ಗ್ರಾಮಸ್ಥರು ಯೋಜನೆಯ ಸೌಲಭ್ಯ ಪಡೆಯಲು ಉದ್ಯೋಗಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿಬೇಡಿಕೆ ಸಲ್ಲಿಸಬೇಕು. ಬೇಡಿಕೆ ಸಲ್ಲಿಸಿದ ಅರ್ಹರಿಗೆ ನಿಯಮಾನುಸಾರ ಉದ್ಯೋಗ ಕಲ್ಪಿಸುವ ಮೂಲಕ ಕುಟುಂಬಗಳ ಆದಾಯ ಹೆಚ್ಚಿಸಲು ಯೋಜನೆ ಸಹಕಾರಿಯಾಗಲಿದೆ. ಹೀಗಾಗಿ ಗ್ರಾಮೀಣ ಭಾಗದ ಜನರು ಯೋಜನೆಯ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಲಭ್ಯವಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, ಗ್ರಾಮೀಣ ಭಾಗದ ಜನರು ಯೋಜನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡು, ಅಗತ್ಯವಿರುವ ಸಂದರ್ಭದಲ್ಲಿಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಬೇಕು. ನೂತನ ಯೋಜನೆಯಡಿ ಕೂಲಿಕಾರ್ಮಿಕರಿಗೆ ನೀಡಲಾಗುವ ದಿನಗೂಲಿ ಮೊತ್ತವನ್ನು 370ರಿಂದ 382ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ, ವಾರ್ಷಿಕ ಮಾನವ ದಿನಗಳ ಮಿತಿಯನ್ನು 100ರಿಂದ 125ಕ್ಕೆ ಹೆಚ್ಚಿಸಲಾಗಿದ್ದು, ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ದಿನಗಳ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಒಂದು ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ಮೂಲಕ ವಾರ್ಷಿಕ 47,750ವರೆಗೆ ಕೂಲಿ ಪಡೆಯಲು ಅವಕಾಶವಿದೆ. ಆದ್ದರಿಂದ ಗ್ರಾಮಸ್ಥರು ಉದ್ಯೋಗದ ಬೇಡಿಕೆಯನ್ನು ಸಮರ್ಪಕವಾಗಿ ಸಲ್ಲಿಸಿ, ಸರಕಾರದ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಿಡಿಒ ದಿನೇಶ ರೆಡ್ಡಿ, ತಾಂತ್ರಿಕ ಸಹಾಯಕ ವಿಶ್ವದೀಪ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್ , ಗ್ರಾಮಸ್ಥರಾದ ಶಿವಕುಮಾರ ಸಾದುರೆ, ಮಕ್ಸುದ್ , ರಜಾಕ್ , ತುಕಾರಾಮ, ಗ್ರಾಪಂ ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಇದ್ದರು.

* 318 ಬಗೆಯ ಕಾಮಗಾರಿಗಳಿಗೆ ಅವಕಾಶ

ವಿಬಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಅಗತ್ಯಕ್ಕೆ ಅನುಗುಣವಾಗಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ನೂತನ ಯೋಜನೆಯಡಿ ಒಟ್ಟು 318 ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದ್ದು, ಗ್ರಾಮಗಳ ಅಭಿವೃದ್ಧಿಯ ಜತೆಗೆ ಸ್ಥಳೀಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿಯೋಜನೆ ಮಹತ್ವದ್ದಾಗಿದೆ. ನೀರು ಸಂರಕ್ಷಣೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಸಾರ್ವಜನಿಕ ಆಸ್ತಿಗಳ ನಿರ್ಮಾಣ ಮತ್ತು ನಿರ್ವಹಣೆ ಸೇರಿ ನಾನಾ ಕಾಮಗಾರಿಗಳನ್ನು ಯೋಜನೆಯಡಿ ಕೈಗೊಳ್ಳಬಹುದಾಗಿದೆ. ಇದರಿಂದ ಗ್ರಾಮಸ್ಥರಿಗೆ ಸ್ಥಳೀಯವಾಗಿಯೇ ಉದ್ಯೋಗ ದೊರೆಯುವ ಅವಕಾಶ ಹೆಚ್ಚಲಿದೆ. ತಮ್ಮ ಗ್ರಾಮದಲ್ಲಿಅಗತ್ಯವಿರುವ ಕಾಮಗಾರಿಗಳ ಕುರಿತು ಗ್ರಾಪಂನ ಗಮನಕ್ಕೆ ತಂದು, ಅವುಗಳನ್ನು ಯೋಜನೆಯಡಿ ಕೈಗೆತ್ತಿಕೊಳ್ಳಲು ಗ್ರಾಮಸ್ಥರು ಸಹಕರಿಸಬೇಕೆಂದು ಅಧಿಕಾರಿಗಳು ತಿಳಿಸಿದರು.