ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ಪುರಸಭೆ ಇಲಾಖೆ ವತಿಯಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿರಸ್ತೆ ಅಭಿವೃದ್ಧಿ ಕಾಮಗಾರಿ ನಡೆದಿದೆ. ಆದರೆ, ಕಾಮಗಾರಿ ನಡೆದಿರುವ ಸ್ಥಳದ ಸಮೀಪವೇ ರಸ್ತೆಯಲ್ಲಿಬೃಹತ್ ಗುಂಡಿ ಬಿದ್ದಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.
ರಸ್ತೆ ಅಭಿವೃದ್ಧಿಗೆ ಲಕ್ಷಾಂತರ ರೂಪಾಯಿ ಹಣ ವ್ಯಯಿಸಿದರೂ ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳ ಅಂತರದಲ್ಲಿರಸ್ತೆ ಗುಂಡಿ ಬಿದ್ದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗುಂಡಿಯಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರು ಅಪಾಯ ಎದುರಿಸುವಂತಾಗಿದೆ.
ಬಸ್ ನಿಲ್ದಾಣದ ಸಮೀಪವಾಗಿರುವುದರಿಂದ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿಕರು ಈ ರಸ್ತೆಯನ್ನು ಬಳಸುತ್ತಾರೆ. ಗುಂಡಿ ಮತ್ತಷ್ಟು ದೊಡ್ಡದಾಗಿ ಅಪಘಾತಕ್ಕೆ ಕಾರಣವಾಗುವ ಮುನ್ನ ಪುರಸಭೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಗುಂಡಿಯನ್ನು ಮುಚ್ಚಿ ರಸ್ತೆ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.