ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಮಾತನಾಡುತ್ತಾ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿದಾಖಲಾಗಿರುವ ದೂರು ಹಾಗೂ ಎಫ್ ಐಆರ್ ರದ್ದು ಕೋರಿ ಸಿ.ಟಿ. ರವಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ಕುರಿತು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಅಲ್ಲದೆ, ಸರಕಾರ, ಚಿಕ್ಕಮಗಳೂರು ಟೌನ್ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯ ಪೀಠ, ವಿಚಾರಣೆಯನ್ನು ಜು.31ಕ್ಕೆ ಮುಂದೂಡಿತು. ವಕೀಲ ಅರುಣ್ ಶ್ಯಾಮ್ , ‘‘ಯಾರ ಭಾವನೆಗೂ ಧಕ್ಕೆ ತರುವ ಕೆಲಸವಾಗಿಲ್ಲ. ಮೂರನೇ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ,’’ ಎಂದು ಪೀಠಕ್ಕೆ ತಿಳಿಸಿದರು.