ಆದಿವಾಸಿಗಳಿಗೆ ಪೌಷ್ಟಿಕ ಆಹಾರ ವಿತರಣೆ ಪುನಾರಂಭಕ್ಕೆ ಆಗ್ರಹ
ವಿಕ ಸುದ್ದಿಲೋಕ ಸಾಗರಜಿಲ್ಲೆಯ ಆದಿವಾಸಿ ಬುಡಕಟ್ಟು ಸಮುದಾಯಗಳಿಗೆ ಮಾಸಿಕ ಪೌಷ್ಟಿಕ ಆಹಾರ ವಿತರಣೆ ಯೋಜನೆಯನ್ನು ಪುನಾರಂಭಿಸಬೇಕು ಹಾಗೂ ಅರಣ್ಯ ಉತ್ಪನ್ನಗಳ ಸಂಗ್ರಹ ಮತ್ತು ಮಾರಾಟಕ್ಕೆ ಅನುಮತಿ ನೀಡಬೇಕೆಂದು ಒತ್ತಾಯಿಸಿ ಅರಣ್ಯಮೂಲ ಬುಡಕಟ್ಟು ಒಕ್ಕೂಟ ಹಾಗೂ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಒಕ್ಕೂಟದ ಮುಖಂಡ ರಾಮಣ್ಣ ಹಸಲರು ಮಾತನಾಡಿ, ಕಳೆದ ಏಪ್ರಿಲ್ ನಿಂದ ಪೌಷ್ಟಿಕ ಆಹಾರ ವಿತರಣೆ ಸ್ಥಗಿತಗೊಂಡಿದ್ದು, ಇದರಿಂದ ಬುಡಕಟ್ಟು ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ. ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಆಹಾರ ವಿತರಣೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷೆ ಲಕ್ಷ್ಮಮ್ಮ ಹಿರೇಮನೆ ಮಾತನಾಡಿ, ಆದಿವಾಸಿಗಳಿಗೆ ಸುಸಜ್ಜಿತ ಸಮುದಾಯ ಭವನ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿತ್ರಶೀರ್ಷಿಕೆ
ಸಾಗರದಲ್ಲಿಮಂಗಳವಾರ ಆದಿವಾಸಿಗಳಿಗೆ ಪೌಷ್ಟಿಕ ಆಹಾರ ವಿತರಣೆ ಪುನಾರಂಭಕ್ಕೆ ಆಗ್ರಹಿಸಿ ಅರಣ್ಯಮೂಲ ಬುಡಕಟ್ಟು ಒಕ್ಕೂಟ ಹಾಗೂ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದಿಂದ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.