ವಿಕ ಸುದ್ದಿಲೋಕ ಬೆಂಗಳೂರು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಕೈಗೆತ್ತಿಕೊಳ್ಳಲಿ ರುವ ಉದ್ದೇಶಿತ 10 ಸಾವಿರ ಕೋಟಿ ರೂ. ವೆಚ್ಚದ ಶರಾವತಿ ಪಂಪ್ ್ಡ ಸ್ಟೋರೇಜ್ ಜಲವಿದ್ಯುತ್ ಯೋಜನೆಯ ಕಾಮಗಾರಿಯನ್ನು ಅರಣ್ಯ ಪ್ರದೇಶದಲ್ಲಿಕೈಗೊಳ್ಳುವುದಕ್ಕೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಸಾಗರದ ಪರಿಸರವಾದಿ ಅಖಿಲೇಶ್ ಚಿಪ್ಲಿ, ಉಡುಪಿಯ ಡಾ.ರವೀಂದ್ರನಾಥ ಶಾನಬಾಗ್ ಮತ್ತು ಶಿವಮೊಗ್ಗದ ಸಿ.ಬಿ.ಮನೋಹರ ಕುಮಾರ್ ಸಲ್ಲಿಸಿರುವ ಅರ್ಜಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು. ಕೇಂದ್ರ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್ , ‘‘ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಇನ್ನೂ ಸಿಕ್ಕಿಲ್ಲ. ಯೋಜನೆ ಬಗೆಗಿನ ಆತಂಕಗಳ ಪರಿಶೀಲನೆ ಮಾಡಲಾಗುತ್ತಿದೆ,’ಧಿ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದಕ್ಕೆ ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಯಾವುದೇ ಮಧ್ಯಂತರ ತಡೆ ನೀಡದಂತೆ ಮನವಿ ಮಾಡಿದರು. ಆದರೆ, ಯೋಜನೆ ಯಿಂದಾಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ನ್ಯಾಯಾಲಯ, ಅರಣ್ಯ ಪ್ರದೇಶದಲ್ಲಿಯಾವುದೇ ಕಾಮಗಾರಿ ಕೈಗೊಳ್ಳಬಾರದು ಎಂದು ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಜೂ. 10ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲೆ ಬಿ.ವಿ.ವಿದ್ಯುಲ್ಲತಾ, ‘‘ವನ್ಯಜೀವಿಗಳ ಪ್ರಯೋಜನಕ್ಕಾಗಿ ಮತ್ತು ಬೇಡದ ಉದ್ದೇಶಗಳಿಗಾಗಿ ವನ್ಯಜೀವಿ ಅಭಯಾರಣ್ಯ ಪ್ರದೇಶ ಬಳಕೆಗೆ ಅನುಮೋದನೆ ನೀಡುವ ಅಧಿಕಾರ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ಇಲ್ಲ. ಈ ನಿಟ್ಟಿನಲ್ಲಿ, ವನ್ಯಜೀವಿ ರಕ್ಷಣಾ ಕಾಯಿದೆ 1972ರ ಕಲಂ 29ರಡಿಯಲ್ಲಿವಿಧಿಸಲಾದ ನಿರ್ಬಂಧವನ್ನು ಗಮನದಲ್ಲಿರಿಸಿಕೊಂಡು ಶರಾವತಿ ಕಣಿವೆಯ ಅಭಯಾರಣ್ಯ ಮತ್ತು ಅದರ ಪರಿಸರ ಸೂಕ್ಷ್ಮ ವಲಯದಲ್ಲಿಕೈಗೆತ್ತಿಕೊಳ್ಳಲಿರುವ ಉದ್ದೇಶಿತ ಯೋಜನೆಗೆ ಯಾವುದೇ ಅನುಮೋದನೆ ನೀಡಬಾರದು,’’ ಎಂದರು.

