ಬಜೆಟ್ ಪುಸ್ತಕಕ್ಕೆ ಬೆಂಕಿ: ಛಲವಾದಿ ಹೇಳಿಕೆಗೆ ಬಾಬು ಕಿಡಿ

Contributed byKENCHE GOWDA|Vijaya Karnataka

ಬಜೆಟ್‌ ಪುಸ್ತಕಕ್ಕೆ ಬೆಂಕಿ ಹಚ್ಚುವ ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ರಮೇಶ್‌ ಬಾಬು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಪಕ್ಷ ನಾಯಕರು ತಮ್ಮ ಜವಾಬ್ದಾರಿ ನಿರ್ವಹಿಸಲು ವಿಫಲರಾಗಿದ್ದಾರೆ. ಪರಿಶಿಷ್ಟ ಉಪಯೋಜನೆ ಹಣ ದುರುಪಯೋಗದ ಕಾರಣ ನೀಡಿ ಬಜೆಟ್‌ ಪುಸ್ತಕಕ್ಕೆ ಬೆಂಕಿ ಇಡುವುದಾಗಿ ಹೇಳುವುದು ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್‌ನಿಂದ ಬಳುವಳಿ ಪಡೆದು ಖರ್ಗೆ ಕುಟುಂಬವನ್ನು ಟೀಕಿಸುವುದು ಸರಿಯಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ಭಟ್ಟಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

fire to budget book babus strong remarks against opposition statement
ಬೆಂಗಳೂರು: ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಇದೀಗ ಬಜೆಟ್ ಪುಸ್ತಕಕ್ಕೆ ಬೆಂಕಿ ಹಚ್ಚುವುದಾಗಿ ಹೇಳಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ವಿಶೇಷ ಸ್ಥಾನಮಾನಗಳಿದ್ದರೂ, ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಛಲವಾದಿ ನಾರಾಯಣಸ್ವಾಮಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ರಮೇಶ್ ಬಾಬು ಅವರು ಛಲವಾದಿ ನಾರಾಯಣಸ್ವಾಮಿ ಅವರ ಹಿಂದಿನ ನಡವಳಿಕೆಗಳನ್ನು ನೆನಪಿಸಿದರು. ಈ ಹಿಂದೆ ವಿಧಾನ ಪರಿಷತ್‌ನಲ್ಲಿ ನಿಯಮಾವಳಿ ಪುಸ್ತಕ ಹರಿದಿದ್ದರು. ಈಗ ಪರಿಶಿಷ್ಟ ಉಪಯೋಜನೆ ಹಣ ದುರುಪಯೋಗದ ಕಾರಣ ನೀಡಿ ಬಜೆಟ್ ಪುಸ್ತಕಕ್ಕೆ ಬೆಂಕಿ ಹಚ್ಚುವುದಾಗಿ ಹೇಳುವ ಮೂಲಕ, "ತಮ್ಮ ಬಟ್ಟೆಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ" ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ, ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್‌ನಿಂದ ಎಲ್ಲ ರೀತಿಯ ಸಹಾಯ ಪಡೆದುಕೊಂಡು, ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬವನ್ನು ಟೀಕಿಸುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ ಎಂದು ರಮೇಶ್ ಬಾಬು ಆರೋಪಿಸಿದರು. ಅಲ್ಲದೆ, ಅವರು ಬಿಜೆಪಿ ಮತ್ತು ಸಂಘ ಪರಿವಾರದ ಭಟ್ಟಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದೂ ಟೀಕಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮ್ಮಯ್ಯ ಕೂಡ ಉಪಸ್ಥಿತರಿದ್ದರು.