ದಾವಣಗೆರೆ : ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಡಿಸಿ ಕಚೇರಿ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿಹೊರಡಿಸಲಾಗಿದ್ದ ನಿಷೇಧಾಜ್ಞೆಯನ್ನು ಸೆ.23ರವರೆಗೆ ವಿಸ್ತರಿಸಲಾಗಿದೆ.ದಾವಣಗೆರೆ ಭದ್ರಾ ಅಚ್ಚುಕಟ್ಟು ಭಾಗದ ಕೊನೇ ಭಾಗದ ಜಮೀನುಗಳಿಗೆ ತಲುಪುವಂತೆ ನಾಲೆಗೆ ನೀರು ಹರಿಸಬೇಕು ಮತ್ತು ಬೆಳೆಗಳಿಗೆ ನೀರು ಒದಗಿಸಬೇಕೆಂದು ಆಗ್ರಹಿಸಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ತೇಜಸ್ವಿ ಪಟೇಲ್ ಅವರ ನೇತೃತ್ವದಲ್ಲಿನಾನಾ ಗ್ರಾಮಗಳ ನೂರಾರು ರೈತರು ಟ್ರ್ಯಾಕ್ಟರ್ ಗಳೊಂದಿಗೆ ಆಗಮಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ, ಕಚೇರಿಯ ಕಲಾಪಗಳಿಗೆ ಅಡ್ಡಿಪಡಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಸಂಬಂಧ ಕಾನೂನು ಸುವ್ಯವಸ್ಥೆ ಕಾಪಾಡಲು ಸೆ.16ರಂದು ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ 1 ಕಿ.ಮೀ. ವ್ಯಾಪ್ತಿಯಲ್ಲಿನಿಷೇಧಿತ ಪ್ರದೇಶವೆಂದು ಈ ಹಿಂದೆ ಆದೇಶಿಸಲಾಗಿತ್ತು. ಈಗ ಇದನ್ನು ಸೆ.23ರ ಸಂಜೆ 6 ಗಂಟೆಯವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.