ಮೊಬೈಲ್ ದಾಸರಾಗದೆ ಓದಿಗೆ ಹೆಚ್ಚಿನ ಮಹತ್ವ ನೀಡಿ: ಸ್ವಾಮಿ ವಿವಿಕ್ತಾನಂದ ಸರಸ್ವತಿ
ಬದಿಯಡ್ಕ ಚಿನ್ಮಯ ವಿದ್ಯಾಲಯ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಜರುಗಿತು. ಶ್ರೀಕೃಷ್ಣ ಹಾಗೂ ರಾಧೆಯರ ಆಕರ್ಷಕ ಮೆರವಣಿಗೆಯನ್ನು ಮುತ್ತುಕೊಡೆ, ವಾದ್ಯಮೇಳ ಸೇರಿದಂತೆ ನಾನಾ ಕಲಾತಂಡಗಳೊಂದಿಗೆ ಶಾಲಾ ಆವರಣಕ್ಕೆ ಬರಮಾಡಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿನ್ಮಯ ಮಿಷನ್ ಮುಖ್ಯಸ್ಥರಾದ ಸ್ವಾಮಿ ವಿವಿಕ್ತಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳು ಮೊಬೈಲ್ ದಾಸರಾಗದೆ, ವಿದ್ಯಾರ್ಥಿ ಜೀವನದಲ್ಲಿಓದಿಗೆ ಹೆಚ್ಚಿನ ಮಹತ್ವ ನೀಡಬೇಕು. ಜ್ಞಾನಾರ್ಜನೆ, ಉತ್ತಮ ಸಂಸ್ಕಾರ ಹಾಗೂ ಶಿಸ್ತಿನ ಜೀವನವೇ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಅಂಶಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟರು. ಶ್ರೀಕೃಷ್ಣನ ಜೀವನ ಹಾಗೂ ಸಂದೇಶವು ವಿದ್ಯಾರ್ಥಿಗಳಿಗೆ ಸತ್ಯ, ಧರ್ಮ, ಕರ್ತವ್ಯ ನಿಷ್ಠೆ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆಯಾಗಬೇಕು ಎಂದು ಸ್ವಾಮೀಜಿ ತಿಳಿಸಿದರು.
ಶಾಲಾ ಮುಖ್ಯಶಿಕ್ಷಕಿ ಮಾನಸ ನೇತೃತ್ವದಲ್ಲಿನಡೆದ ಕಾರ್ಯಕ್ರಮದಲ್ಲಿಅಧ್ಯಾಪಕರು, ಬೋಧಕೇತರ ವೃಂದ, ಹೆತ್ತವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿದ್ಯಾರ್ಥಿಗಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕೃಷ್ಣ-ರಾಧೆಯರ ವೇಷಭೂಷಣ, ನೃತ್ಯ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಕ್ಕೆ ವಿಶೇಷ ಆಕರ್ಷಣೆಯಾಯಿತು. ಭಕ್ತಿ, ಸಂಸ್ಕೃತಿ ಮತ್ತು ವಿದ್ಯಾರ್ಥಿಗಳ ಪ್ರತಿಭೆಯ ಸಮ್ಮಿಲನದೊಂದಿಗೆ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಶಾಲಾ ಸಮುದಾಯದ ಮನದಲ್ಲಿಅವಿಸ್ಮರಣೀಯ ಅನುಭವವಾಗಿ ಮೂಡಿತು.